ಆಕಾಶಕ್ಕೆದ್ದು ನಿಂತ...
- ಕೆ. ಎಸ್. ನರಸಿಂಹ ಸ್ವಾಮಿ
ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಬೆರ್ದೆರೆಗಳ ಗಾನದಲ್ಲಿ
ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷವೇಳುವಲ್ಲಿ
ಕಣ್ಣು ಬೇರೆ ನೋಟವೊಂದು ನಾವು ಭಾರತೀಯರು
ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಲಿನಲ್ಲಿ
ನಮ್ಮ ಯೋಧರೆತ್ತಿ ಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದ ನಮ್ಮ ಕೊರಳಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿದೆಲ್ಲ ಹಾಡಿನಲ್ಲಿ
ಭಾಷೆ ಬೇರೆ ಭಾವವೊಂದು ನಾವು ಭಾರತೀಯರು
ನಾಡಿಗಾಗಿ ತನುವ ತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲೂ ನೆರೆಗೆ ನೆರಳನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನಡೆವ ಧೀರ ಪಯಣದಲ್ಲಿ
ಎಲ್ಲೇ ಇರಲಿ ನಾವು ಒಂದು ನಾವು ಭಾರತೀಯರು
No comments:
Post a Comment
Note: Only a member of this blog may post a comment.